ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತವರ ಕುಟುಂಬದವರಿಂದ ಕೇತಗಾನಹಳ್ಳಿಯಲ್ಲಿ ಸರಕಾರಿ ಜಮೀನು ಒತ್ತುವರಿ ಪ್ರಕರಣದ ತನಿಖೆಗೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ–1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ–2011ರ ಅಡಿಯಲ್ಲಿ ಈ ವಿಶೇಷ ತನಿಖಾ ತಂಡ ರಚಿಸಿ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ.
ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸಾರ್ ಅಹಮ್ಮದ್, ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್ ಗದ್ಯಾಳ, ಕಂದಾಯ ಆಯುಕ್ತಾಲಯದ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಅವರನ್ನು ಎಸ್ಐಟಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಗ್ರೇಡ್–2 ತಹಶೀಲ್ದಾರ್ ಶೀತಲ್ ಅವರನ್ನು ಎಸ್ಐಟಿಯ ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ