EBM News Kannada
Leading News Portal in Kannada

ಆನೆ ಹಾವಳಿ ತಡೆಗಟ್ಟಲು ಕೆ.ಪಿ.ಟ್ರ್ಯಾಕರ್ ಸಹಕಾರಿ: ಸಚಿವ ಈಶ್ವರ ಖಂಡ್ರೆ

0


ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಸುತ್ತಮುತ್ತ ಆನೆಗಳು ಜನವಸತಿ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ‘ರೇಡಿಯೋ ಕಾಲರ್’ ಅಳವಡಿಸುವ ಮೂಲಕ ಆನೆಗಳ ಚಲನವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಬುಧವಾರ ಅರಣ್ಯ ಭವನದಲ್ಲಿ ಅರಣ್ಯ ಇಲಾಖೆ, ಬೆಂಗಳೂರಿನ ಇನ್‍ಫಿಕ್ಷನ್ ಲ್ಯಾಬ್ಸ್ ಪ್ರೈವೇಟ್ ಲಿ. ಜೊತೆಗೂಡಿ ಅಭಿವೃದ್ಧಿಪಡಿಸಿರುವ ಕರ್ನಾಟಕ-ಪರಿಶೋಧಿತ ಪತ್ತೆ ಸಾಧನ(ಕೆ.ಪಿ.ಟ್ರ್ಯಾಕರ್)ಎಂಬ ಹೆಸರಿನ ರೇಡಿಯೋ ಕಾಲರ್‍ಗಳನ್ನು ಬಂಡೀಪುರ ಮತ್ತು ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶದ ಅಧಿಕಾರಿಗಳಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

6,395 ಆನೆಗಳನ್ನು ಹೊಂದಿರುವ ಕರ್ನಾಟಕ ದೇಶದಲ್ಲಿ ಆನೆಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿದೆ. ಆದರೆ ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ. ಅಮೂಲ್ಯವಾದ ಜೀವ ಉಳಿಸಲು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಸ್ಥಳೀಯರಿಗೆ ಮಾಹಿತಿ ನೀಡಲು ಸರಕಾರ ಪ್ರಯತ್ನ ಮಾಡುತ್ತಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಈವರೆಗೆ ದಕ್ಷಿಣ ಆಫ್ರಿಕಾದೇಶದ ಆಫ್ರಿಕನ್ ವೈಲ್ಡ್‍ಲೈಫ್ ಟ್ರಾಕಿಂಗ್ ಮತ್ತು ಜರ್ಮನಿಯ ವೆಕ್ಟ್ರೋನಿಕ್ ಸಂಸ್ಥೆಗಳಿಂದ ಈ ರೇಡಿಯೋ ಕಾಲರ್‍ಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಸಕಾಲದಲ್ಲಿ ಈ ರೇಡಿಯೋ ಕಾಲರ್ ಲಭ್ಯವಾಗುತ್ತಿರಲಿಲ್ಲ, ಜತೆಗೆ ಒಂದು ರೇಡಿಯೋ ಕಾಲರ್‍ಗೆ .6.5ಲಕ್ಷ ರೂ.ವೆಚ್ಚ ತಗುಲುತ್ತಿತ್ತು.

ಆದರೆ ಇದೀಗ ದೇಶೀಯವಾಗಿ ಅಭಿವೃದ್ಧಿ ಪಡಿಸಿರುವ ರೇಡಿಯೋ ಕಾಲರ್‍ಗೆ 1.80ಲಕ್ಷ ರೂ.ಆಗುತ್ತದೆ. ಇದು ಹೆಚ್ಚಿನ ರೇಡಿಯೋ ಕಾಲರ್‍ಗಳು ಲಭ್ಯವಾಗುವಂತೆ ಮಾಡುವುದಲ್ಲದೆ, ವಿದೇಶೀ ಅವಲಂಬನೆ ಹಾಗೂ ದುಬಾರಿ ವೆಚ್ಚ ತಗ್ಗಿಸುತ್ತದೆ, ವಿದೇಶೀ ವಿನಿಮಯವನ್ನೂ ಉಳಿಸುತ್ತದೆ ಎಂದು ಈಶ್ವರ್ ಖಂಡ್ರೆ ಹೇಳಿದರು.

ಜೊತೆಗೆ ಆಮದು ರೇಡಿಯೋ ಕಾಲರ್‍ಗಳ ತೂಕ 16 ರಿಂದ 17 ಕೆ.ಜಿ. ಇರುತ್ತಿತ್ತು. ಆದರೆ ಈಗ ದೇಶೀಯವಾಗಿ ಅಭಿವೃದ್ಧಿ ಪಡಿಸಲಾಗಿರುವ ಕಾಲರ್ ಕೇವಲ 7ಕೆ.ಜಿ. ತೂಕವಿದ್ದು, ಇದು ಹಗುರವಾಗಿರುತ್ತದೆ ಎಂದು ಖಂಡ್ರೆ ನುಡಿದರು.

ಪರಿಸರ ಸ್ನೇಹಿ ಕಾಲರ್: ಅರಣ್ಯ ಇಲಾಖೆ ತನ್ನ ಅಗತ್ಯಗಳಿಗೆ ಅನುಗುಣವಾಗಿ ಮತ್ತು ಪರಿಸರ ಸ್ನೇಹಿಯಾದ ಕಚ್ಚಾವಸ್ತುಗಳನ್ನೇ ಬಳಸಿ ಈ ರೇಡಿಯೋ ಕಾಲರ್ ತಯಾರಿಸಿದ್ದು, ವನ್ಯಜೀವಿ, ಪರಿಸರಕ್ಕಾಗಲೀ ಅಪಾಯವಾಗುವುದಿಲ್ಲ. ಒಂದೊಮ್ಮೆ ರೇಡಿಯೋ ಕಾಲರ್‍ಗಳಲ್ಲಿ ದೋಷ ಕಂಡು ಬಂದರೆ ದುರಸ್ತಿ ಮಾಡಲು, ಬ್ಯಾಟರಿ, ಬಲ್ಬ್, ಸಕ್ರ್ಯೂಟ್ ಬದಲಾಯಿಸಲು ಅವಕಾಶವಿದೆ. ಆದರೆ ಆಮದು ರೇಡಿಯೋ ಕಾಲರ್‍ಗಳಲ್ಲಿ ಈ ಅವಕಾಶ ಇರಲಿಲ್ಲ ಎಂದು ವಿವರಿಸಿದರು.

ಸುರಕ್ಷತೆ ಮತ್ತು ಸಬಲೀಕರಣ: ವಿದೇಶದಿಂದ ಆಮದು ಮಾಡಿಕೊಳ್ಳಲಾಗುತ್ತಿದ್ದ ರೇಡಿಯೋ ಕಾಲರ್‍ಗಳಿಂದ ನಮ್ಮ ಕಾಡು ಮತ್ತು ವನ್ಯಜೀವಿಗಳ ಮಾಹಿತಿ ಸೋರಿಕೆ ಆಗುವ ಅಪಾಯವೂ ಇತ್ತು. ಈಗ ದೇಶೀಯವಾಗಿ ಈ ರೇಡಿಯೋ ಕಾಲರ್ ಅಭಿವೃದ್ಧಿ ಪಡಿಸಿರುವುದರಿಂದ ಅಂತಹ ಅಪಾಯ ಇರುವುದಿಲ್ಲ. ದತ್ತಾಂಶವು ಸ್ಥಳೀಯ ಸರ್ವರ್‍ಗಳಲ್ಲಿ ಸುರಕ್ಷತವಾಗಿರುತ್ತದೆ ಎಂದು ಈಶ್ವರ ಖಂಡ್ರೆ ವಿವರಿಸಿದರು.

ಮೊದಲ ಹಂತದಲ್ಲಿ ಆನೆಗಳ ರೇಡಿಯೋ ಕಾಲರ್ ಮಾತ್ರ ಸಿದ್ಧವಾಗಿದೆ. ಹುಲಿ ಮತ್ತು ಚಿರತೆ ಕಾಲರ್‍ಗಳ ಅಭಿವೃದ್ಧಿಯೂ ಪ್ರಗತಿಯಲ್ಲಿದ್ದು, ಇದನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಈಶ್ವರ ಖಂಡ್ರೆ ಮಾಹಿತಿ ನೀಡಿದರು.

ಇಲಾಖೆಯ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್ ಹಾಗೂ ಇನ್‍ಫಿಕ್ಷನ್ ಲ್ಯಾಬ್ಸ್ ಪ್ರೈವೇಟ್ ಲಿ.ನ ತಾಂತ್ರಿಕ ತಜ್ಞ ಗುರುದೀಪ ಅವರು ಸ್ವದೇಶಿ ಜಿಎಸ್‍ಎಂ ಆಧಾರಿತ ಆನೆ ರೇಡಿಯೋ ಕಾಲರ್ ಅಭಿವೃದ್ಧಿಪಡಿಸಿದ್ದಾರೆ. ಈ ಕಾಲರ್‍ಗೆ ಕರ್ನಾಟಕ ಪರಿಶೋಧಿತ ಟ್ರ್ಯಾಕರ್ ಅಥವಾ ಕರ್ನಾಟಕ ಪ್ರಡ್ಯೂಸ್ಡ್ (ಕೆ.ಪಿ.ಟ್ರ್ಯಾಕರ್) ಎಂದು ಹೆಸರಿಸಲಾಗಿದೆ. ಈ ಸಂದರ್ಭದಲ್ಲಿ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಸುಭಾμï ಮಾಲ್ಕಡೆ, ಎಪಿಸಿಸಿಎಫ್ ಕುಮಾರ್ ಪುಷ್ಕರ್ ಮತ್ತು ಅಜಿತ್ ರೆ ಉಪಸ್ಥಿತರಿದ್ದರು.

Leave A Reply

Your email address will not be published.